ನವದೆಹಲಿ: ಪ್ರಧಾನಿ ಮೋದಿ ಸರ್ಕಾರ 6,366 ಕೋಟಿ ರೂ. ನರೇಗಾ ವೇತನ ಬಾಕಿ ಉಳಿಸಿಕೊಂಡಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರೋಪ ಮಾಡಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಮಲ್ಲಿಕಾರ್ಜುನ ಖರ್ಗೆ, ನರೇಗಾ (ಮಹಾತ್ಮಗಾಂಧಿ ಗ್ರಾಮೀಣ ಉದ್ಯೋಗ ಖಾತರಿ) ಯೋಜನೆಗೆ ಬಜೆಟ್ನಲ್ಲಿ ಮೂರನೇ ಒಂದು ಭಾಗದಷ್ಟು ಕಡಿತದ ನಂತರವೂ 18 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ ಸರ್ಕಾರ ₹ 6,366 ಕೋಟಿಯಷ್ಟು ಬಾಕಿ ಉಳಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ.
2005, ಆಗಸ್ಟ್ 23ರಂದು ಕಾಂಗ್ರೆಸ್ ಸರ್ಕಾರ ನರೇಗಾ ಯೋಜನೆಯನ್ನು ಪ್ರಾರಂಭಿಸಿತು. ಇದರಿಂದ ದೇಶದ ಕೋಟ್ಯಂತರ ಜನರಿಗೆ ಅನುಕೂಲವಾಗಿದೆ ಎಂದು ನರೇಗಾ ಯೋಜನೆಯನ್ನು ಅವರು ಶ್ಲಾಘಿಸಿದರು.
ಹಲವು ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ನರೇಗಾ ಯೋಜನೆಯಡಿ ನೀಡಬೇಕಾದ ₹6,366 ಕೋಟಿಯಷ್ಟು ಹಣವನ್ನು ಕೇಂದ್ರ ಸರ್ಕಾರ ಪಾವತಿ ಮಾಡದೇ ಬಾಕಿ ಉಳಿಸಿಕೊಂಡಿದೆ. ಈ ಯೋಜನೆ ಅಡಿಯಲ್ಲಿ ದೇಶದ 14 ಕೋಟಿ ಕಾರ್ಮಿಕರು ಸಕ್ರಿಯರಾಗಿದ್ದಾರೆ. ಇವರಲ್ಲಿ 8 ಕೋಟಿಯಷ್ಟು ಮಹಿಳೆಯರು ಇದ್ದಾರೆ. ಈ ಯೋಜನೆ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆ ಎಂದು ಖರ್ಗೆ ಹೇಳಿದ್ದಾರೆ.
ಕೋವಿಡ್ ಸಂದರ್ಭದಲ್ಲಿ ನರೇಗಾ ಯೋಜನೆ ಕೊಟ್ಯಾಂತರ ಜನರಿಗೆ ಜೀವನ ಭದ್ರತೆ ಒದಗಿಸಿತು. ಮನೆಯಲ್ಲಿ ಕುಳಿತ ಕಾರ್ಮಿಕರಿಗೆ ಭದ್ರತೆ ನೀಡಿತು ಎಂದು ಖರ್ಗೆ ಹೇಳಿದ್ದಾರೆ.