ಬೆಂಗಳೂರು: ರಾಜ್ಯದಲ್ಲಿ ಮಳೆ ಕೊರತೆಯಾಗಿ ಬರದ ಛಾಯೆ ಎದುರಾಗಿದ್ದರೂ ಕಾಂಗ್ರೆಸ್ ಸರ್ಕಾರ ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿದ್ದು ಸರ್ಕಾರದ ಈ ನಡೆಯನ್ನ ಬಿಜೆಪಿ ಮತ್ತು ಜೆಡಿಎಸ್ ಖಂಡಿಸಿವೆ. ಈ ನಡುವೆ ಎಚ್ಚೆತ್ತ ಸರ್ಕಾರ, ನಾಳೆ ಸರ್ವಪಕ್ಷಗಳ ಸಭೆ ಕರೆದಿದ್ದು, ಸಭೆಗೆ ಮಾಜಿ ಸಿಎಂಗಳಿಗೆ ಸಿಎಂ ಸಿದ್ಧರಾಮಯ್ಯ ಆಹ್ವಾನ ನೀಡಿದ್ದಾರೆ.
ವಿಧಾನಸೌಧದಲ್ಲಿ ನಾಳೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸರ್ವಪಕ್ಷಗಳ ಸಭೆ ನಡೆಯಲಿದ್ದು, ಸರ್ವಪಕ್ಷ ಸಭೆಗೆ ಮಾಜಿ ಸಿಎಂಗಳಾದ ಬಿಎಸ್ ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ, ಡಿವಿ ಸದಾನಂದ ಗೌಡ, ಹೆಚ್ ಡಿ ಕುಮಾರಸ್ವಾಮಿಗೂ ಆಹ್ವಾನ ನೀಡಲಾಗಿದೆ.
ಪತ್ರದ ಮೂಲಕ ಬಿ.ಎಸ್.ಯಡಿಯೂರಪ್ಪ, ಬೊಮ್ಮಾಯಿಗೆ ಆಹ್ವಾನಿಸಿದ್ದು ದೂರವಾಣಿ ಕರೆ ಮೂಲಕ ಡಿ.ವಿ.ಸದಾನಂದಗೌಡರಿಗೆ ಆಹ್ವಾನ ನೀಡಲಾಗಿದೆ. ಸರ್ಕಾರದ ಮಟ್ಟದಲ್ಲಿ ಯಾವುದೇ ಸ್ಥಾನ ಇಲ್ಲದಿದ್ದರೂ ಯಡಿಯೂರಪ್ಪ ಅವರಿಗೆ ಆಹ್ವಾನ ನೀಡಿರುವುದು ಕುತೂಹಲಕ್ಕೆ ಕಾರಣವಾಗಿದೆ.