ಬೆಂಗಳೂರು: ರಾಜ್ಯದಲ್ಲಿ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರ ಅಧಿಕಾರ ಅವಧಿಯನ್ನು 5 ವರ್ಷಕ್ಕೆ ವಿಸ್ತರಣೆ ಮಾಡಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ.
ಈ ಕುರಿತು ಮಾತನಾಡಿ ಮಾಹಿತಿ ನೀಡಿರುವ ಕಂದಾಯ ಸಚಿವ ಕೃಷ್ಣಭೈರೇಗೌಡ, ರಾಜ್ಯದಲ್ಲಿ ಅಗತ್ಯವಿರುವ ಕಡೆಯಲ್ಲಿ ತಾಲೂಕು ಪಂಚಾಯ್ತಿ ಕ್ಷೇತ್ರ ಮರು ವಿಂಗಡನೆ ಮತ್ತು ಪಂಚಾಯತ್ ರಾಜ್ ಸಂಸ್ಥೆಗಳ ಅಧ್ಯಕ್ಷ, ಉಪಾಧ್ಯಕ್ಷರ ಅಧಿಕಾರದ ಅವಧಿಯನ್ನು 5 ವರ್ಷಕ್ಕೆ ವಿಸ್ತರಿಸಲು ಚಿಂತನೆ ನಡೆಸಿದ್ದೇವೆ ಎಂದು ತಿಳಿಸಿದ್ದಾರೆ.
ಶಿವಮೊಗ್ಗ ಜಿಲ್ಲೆಯನ್ನು ಕೊಡಗು, ಚಿಕ್ಕಮಗಳೂರು, ಉತ್ತರ ಕನ್ನಡ ರೀತಿಯಲ್ಲಿ ಪರಿಗಣಿಸಿ 21 ಸಾವಿರ ಜನಸಂಖ್ಯೆಗೆ ಒಬ್ಬರಂತೆ ಸದಸ್ಯರ ಸ್ಥಾನಗಳನ್ನು ಮರು ನಿಗದಿಪಡಿಸುವ ತಿದ್ದುಪಡಿಗೆ ಸಿಎಂ ಸಿದ್ಧರಾಮಯ್ಯ ಅನುಮತಿ ನೀಡಿದ್ದಾರೆ ಎಂದು ಸಚಿವ ಕೃಷ್ಣಭೈರೇಗೌಡ ತಿಳಿಸಿದ್ದಾರೆ.
ಕೇಂದ್ರ ಸರ್ಕಾರ ನೀಡಿದ ನಿರ್ದಿಷ್ಟ ಅರ್ಜಿ ನಮೂನೆಯಂತೆ ಬರಪೀಡಿತ ತಾಲೂಕುಗಳಲ್ಲಿ ಜಂಟಿಯಾಗಿ ಸ್ಥಳ, ಬೆಳೆ ಸಮೀಕ್ಷೆ ನಡೆಸಲು ಕಂದಾಯ ಮತ್ತು ಕೃಷಿ ಇಲಾಖೆಗಳ ಅಧಿಕಾರಿಗಳಿಗೆ ಸೂಚಿಸಲಾಗಿದೆ. 75 ತಾಲೂಕುಗಳ ಆಯ್ದ 10 ಗ್ರಾಮಗಳಲ್ಲಿ ತಲಾ ಐದು ಬೆಳೆಗಳ ಸಮೀಕ್ಷೆ ನಡೆಸಲಿದ್ದು, 10 ದಿನಗಳಲ್ಲಿ ವರದಿ ನೀಡುವಂತೆ ಸೂಚಿಸಲಾಗಿದೆ ಎಂದಿದ್ದಾರೆ.
ಬರಪೀಡಿತ ತಾಲೂಕುಗಳ ಆಯ್ದ 10 ಗ್ರಾಮಗಳಲ್ಲಿ ತಲಾ ಐದು ಬೆಳೆಗಳ ಸ್ಥಳ ಸಮೀಕ್ಷೆ ನಡೆಸಿ, ಶೇ.60ಕ್ಕಿಂತ ಹೆಚ್ಚು ಬೆಳೆ ಹಾನಿಯಾಗಿದ್ದರೇ ಬರಪೀಡಿತವೆಂದು ಪರಿಗಣಿಸಬೇಕಾಗುತ್ತದೆ ಎಂದು ಅವರು ತಿಳಿಸಿದರು.
ಹವಾಮಾನ ಇಲಾಖೆಯ ಮುನ್ಸೂಚನೆ ಪ್ರಕಾರ ಸೆಪ್ಟೆಂಬರ್ 30ರವರೆಗೂ ವಾಡಿಕೆಗಿಂತ ಕಡಿಮೆ ಪ್ರಮಾಣದ ಮಳೆಯಾಗಲಿದೆ. ಸಂಭಾವ್ಯ ಕಳವಳಕಾರಿ ಪರಿಸ್ಥಿತಿಯನ್ನು ಎದುರಿಸಲು ಸರ್ಕಾರ ಸನ್ನದ್ಧವಾಗಿದೆ ಎಂದರು.