ಶಿವಮೊಗ್ಗ: ಕಣ್ಣು ಸೂಕ್ಷ್ಮ ಅಂಗ ಆಗಿದ್ದು, ಕಣ್ಣಿನ ಸುರಕ್ಷತೆಗೆ ಹೆಚ್ಚಿನ ಪ್ರಾಮುಖ್ಯತೆ ನೀಡಬೇಕು. ಕಾಲ ಕಾಲಕ್ಕೆ ಕಣ್ಣಿನ ತಪಾಸಣೆ ಮಾಡಿಸಿಕೊಳ್ಳಬೇಕು. ವೈದ್ಯರ ಮಾರ್ಗದರ್ಶನ ಪಡೆಯಬೇಕು ಎಂದು ಜೆಸಿಐ ಶಿವಮೊಗ್ಗ ಭಾವನಾ ಅಧ್ಯಕ್ಷೆ ಪೂರ್ಣಿಮಾ ಸುನೀಲ್ ಹೇಳಿದರು.
ಶಿವಮೊಗ್ಗ ನಗರದ ಗೋಪಾಳದಲ್ಲಿರುವ ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಶಂಕರ ಕಣ್ಣಿನ ಆಸ್ಪತ್ರೆಯ ಸಹಯೋಗದಲ್ಲಿ ಜೆಸಿಐ ಶಿವಮೊಗ್ಗ ಭಾವನಾ ಸಂಸ್ಥೆ ವತಿಯಿಂದ ಆಯೋಜಿಸಿದ್ದ ಕಣ್ಣಿನ ತಪಾಸಣಾ ಶಿಬಿರ ಹಾಗೂ ನೇತ್ರದಾನದ ಕುರಿತು ಅರಿವು ಮೂಡಿಸುವ ಕಾರ್ಯಕ್ರಮದಲ್ಲಿ ಮಾತನಾಡಿದರು.
ಕಣ್ಣಿನ ತಪಾಸಣೆ ಜೊತೆಯಲ್ಲಿ ಎಲ್ಲರೂ ನೇತ್ರದಾನದ ಮಹತ್ವದ ಬಗ್ಗೆ ಅರಿತುಕೊಳ್ಳಬೇಕು. ಕಣ್ಣುದಾನ ಮಾಡುವುದರಿಂದ ನೂರಾರು ಜನರಿಗೆ ದೃಷ್ಠಿ ನೀಡಿದ ಸಾರ್ಥಕ ಕೆಲಸ ಮಾಡಿದ ತೃಪ್ತಿ ಸಿಗುತ್ತದೆ. ನೇತ್ರದಾನದ ಬಗ್ಗೆ ಪೋಷಕರಿಗೂ ತಿಳವಳಿಕೆ ನೀಡಲು ವಿದ್ಯಾರ್ಥಿಗಳು ಮುಂದಾಗಬೇಕು ಎಂದು ತಿಳಿಸಿದರು.
ಜೆಸಿಐ ಶಿವಮೊಗ್ಗ ಭಾವನಾ ಸಂಸ್ಥೆಯು ನಿರಂತರವಾಗಿ ಸಮಾಜಮುಖಿ ಕಾರ್ಯ ಚಟುವಟಿಕೆಗಳನ್ನು ನಡೆಸಿಕೊಂಡು ಬರುತ್ತಿದ್ದು, ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರದಲ್ಲಿ ಮಹತ್ತರ ಕೆಲಸಗಳನ್ನು ಮಾಡುತ್ತಿದೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಆರೋಗ್ಯ ತಪಾಸಣಾ ಹಾಗೂ ಜಾಗೃತಿ ಶಿಬಿರಗಳನ್ನು ಹಮ್ಮಿಕೊಳ್ಳಲಾಗುವುದು ಎಂದರು.
ಕಣ್ಣಿನ ತಪಾಸಣಾ ಶಿಬಿರದಲ್ಲಿ 300 ವಿದ್ಯಾರ್ಥಿನಿಯರು ಭಾಗವಹಿಸಿದ್ದು, ನೂರಕ್ಕೂ ಅಧಿಕ ವಿದ್ಯಾರ್ಥಿನಿಯರು, ಶಾಲಾ ಸಿಬ್ಬಂದಿ, ಉಪನ್ಯಾಸಕರು ನೇತ್ರದಾನ ಮಾಡಲು ಮುಂದಾದರು. ಯುವ ರೆಡ್ಕ್ರಾಸ್ ಘಟಕ, ರಾಷ್ಟ್ರೀಯ ಸೇವಾ ಯೋಜನೆ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಜೆಸಿಐ ನಿರ್ದೇಶಕಿ ಶಾರದಾ ಶೇಷಗಿರಿಗೌಡ, ಕಾರ್ಯದರ್ಶಿ ಕವಿತಾ ಜೋಯೀಸ್, ಕಾಲೇಜಿನ ಪ್ರಾಚಾರ್ಯ ರವಿಕುಮಾರ್, ಜೆಸಿಐ ಶಿವಮೊಗ್ಗ ಭಾವನಾ ಸಂಸ್ಥೆ ಪದಾಧಿಕಾರಿಗಳು, ಶಂಕರ ಕಣ್ಣಿನ ಆಸ್ಪತ್ರೆಯ ವೈದ್ಯರು, ಸಿಬ್ಬಂದಿ ಉಪಸ್ಥಿತರಿದ್ದರು.