ಕನ್ನಡಿಗರ ಪ್ರಜಾನುಡಿ
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಸಂವಿಧಾನ ವಿರೋಧಿಗಳ ಕೈಗೆ ಅಧಿಕಾರ ನೀಡಿ ನಿಮ್ಮ ಮತ್ತು ನಿಮ್ಮ ಮಕ್ಕಳ ಭವಿಷ್ಯ ಹಾಳು ಮಾಡಬೇಡಿ- ಸಿಎಂ ಸಿದ್ದರಾಮಯ್ಯ ಕಿವಿಮಾತು.

ಬೆಂಗಳೂರು :  ಸಂವಿಧಾನ ವಿರೋಧಿಗಳ ಕೈಗೆ ಅಧಿಕಾರ ನೀಡಿ ನಿಮ್ಮ ಮತ್ತು ನಿಮ್ಮ ಮಕ್ಕಳ ಭವಿಷ್ಯ ಹಾಳು ಮಾಡಿಕೊಳ್ಳಬೇಡಿ. ಸಂವಿಧಾನ ವಿರೋಧಿಗಳ ಒಡೆದು ಆಳುವ ನೀತಿಯನ್ನು ಸರಿಯಾಗಿ ಅರ್ಥಮಾಡಿಕೊಳ್ಳಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.

ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಟೌನ್ ಹಾಲ್ ನಲ್ಲಿ ಹಮ್ಮಿಕೊಂಡಿದ್ದ ಡಿ.ದೇವರಾಜ ಅರಸು ಜಯಂತೋತ್ಸವ ಮತ್ತು ರಾಜ್ಯ ಮಟ್ಟದ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು.

ಸಂವಿಧಾನ ರಚನಾ ಸಮಿತಿಗೆ ಅಂಬೇಡ್ಕರ್ ಅವರು ಅಧ್ಯಕ್ಷರಾಗದೇ ಹೋಗಿದ್ದರೆ ನಮ್ಮ ದೇಶಕ್ಕೆ ಇಷ್ಟೊಂದು ಅರ್ಥಪೂರ್ಣವಾದ ಸಂವಿಧಾನ ದೊರೆಯುತ್ತಿರಲಿಲ್ಲ. ಅಂಬೇಡ್ಕರ್ ಮತ್ತು ಸಂವಿಧಾನದ ಆಶಯಗಳನ್ನು ತಮ್ಮ ಮುಖ್ಯಮಂತ್ರಿ ಸ್ಥಾನದ ಮೂಲಕ ಸಮರ್ಥವಾಗಿ ಜಾರಿ ಮಾಡಲು ದೇವರಾಜ ಅರಸು ಅವರು ಶ್ರಮಿಸಿದರು. ಹೀಗಾಗಿ ಅವರಿಗಿಂತ ಮುಂಚಿನ ಯಾವ ಮುಖ್ಯಮಂತ್ರಿಗಳೂ ಜಾರಿ ಮಾಡದ ಸಾಮಾಜಿಕ ನ್ಯಾಯದ ಕಾರ್ಯಕ್ರಮಗಳನ್ನು ಮುಖ್ಯಮಂತ್ರಿಯಾಗಿ ಜಾರಿ ಮಾಡಿದರು ಎಂದು ವಿವರಿಸಿದರು.

ಉಳುವವನೇ ಭೂ ಒಡೆಯ ಎನ್ನುವ ಕಾನೂನನ್ನು ಬಿಜೆಪಿಯವರು ಉಲ್ಟಾ ಮಾಡಿ ಉಳ್ಳವನೇ ಭೂ ಒಡೆಯ ಎಂದು ಬದಲಾಯಿಸಿಬಿಟ್ಟಿದ್ದಾರೆ. ಇದಕ್ಕಾಗಿ ಸಂವಿಧಾನ 79 (a), (b) ವನ್ನೇ ರದ್ದುಪಡಿಸಿದ್ದಾರೆ ಎಂದು ಸಿಎಂ ಸಿದ್ಧರಾಮಯ್ಯ ಟೀಕಿಸಿದರು.

ಸಂವಿಧಾನ ವಿರೋಧಿಗಳಿಗೆ, ಬಡವ-ಮಧ್ಯಮ ವರ್ಗದ ವಿರೋಧಿಗಳ ಕೈಗೆ ಅಧಿಕಾರ ಕೊಟ್ಟರೆ ಸಾಮಾಜಿಕ ನ್ಯಾಯ ನೆಗೆದು ಬೀಳುತ್ತದೆ. ದೇವರಾಜ ಅರಸರು‌ ಹಾವನೂರು ವರದಿ ಜಾರಿ ಮಾಡುವವರೆಗೆ ಹಿಂದುಳಿದ ವರ್ಗಗಳಿಗೆ ಮೀಸಲಾತಿ ಸಿಕ್ಕಿರಲಿಲ್ಲ. ಎಷ್ಟೇ ವಿರೋಧ ಬಂದರೂ ಎದೆಗುಂದದೆ ಎದೆಗಾರಿಕೆಯಿಂದ ಹಾವನೂರು ವರದಿ ಜಾರಿ ಮಾಡಿದ್ದು ಅರಸು ಅವರು ಎಂದು ಸಿಎಂ ಸಿದ್ಧರಾಮಯ್ಯ ಮೆಚ್ಚುಗೆ ಸೂಚಿಸಿದರು.

ಅಧಿಕಾರ ಯಾರ ಕೈಗೆ ಕೊಡಬೇಕು ಎನ್ನುವ ಸ್ಪಷ್ಟ ತಿಳಿವಳಿಕೆ ದಲಿತ-ಶೂದ್ರ ಸಮುದಾಯ ಪಡೆದುಕೊಳ್ಳಬೇಕು. ದಲಿತ-ಶೂದ್ರ-ಬಡವ ಮತ್ತು ಮಧ್ಯಮ ವರ್ಗಗಳಿಗೆ ಬದುಕಿನ ಅವಕಾಶ ದೊರಕಿದ್ದು ಸಂವಿಧಾನದಿಂದ. ಈ ಸಂವಿಧಾನವನ್ನು ದ್ಷೇಷಿಸುವವರ ಕೈಗೆ ಅಧಿಕಾರ ಕೊಟ್ಟರೆ ಬಡವ-ಮಧ್ಯಮ ವರ್ಗದವರ ಉದ್ದಾರ ಆಗಲು ಹೇಗೆ ಸಾಧ್ಯ ಎಂದು ಪ್ರಶ್ನಿಸಿದರು.

ಅಂಬೇಡ್ಕರ್ ಭಾರತೀಯ ಸಮಾಜಕ್ಕೆ ತಕ್ಕ ಸಾಮಾಜಿಕ ನ್ಯಾಯದ ಸಂವಿಧಾನ ನೀಡಿದರು. ಆದರೆ ಇಲ್ಲಿಯವರೆಗೂ ಸಂವಿಧಾನದ ಆಶಯಗಳು ಸಂಪೂರ್ಣ ಈಡೇರಿಲ್ಲ. ಶ್ರಮಿಕ ಶೂದ್ರ ವರ್ಗ ಶ್ರಮಿಕರಲ್ಲದ ಸೇವೆ ಮಾಡಿಕೊಂಡಿರಬೇಕಿತ್ತು. ಇದನ್ನು ದೇವರಾಜ ಅರಸರು ಜೀತ ವಿಮುಕ್ತಿ, ಋಣಮುಕ್ತ ಕಾರ್ಯಕ್ರಮಗಳ ಮೂಲಕ ತಪ್ಪಿಸಿದರು  ಎಂದು ಸಿದ‍್ಧರಾಮಯ್ಯ ತಿಳಿಸಿದರು.

ಬಡವರ ಮತ್ತು ಮಧ್ಯಮ ವರ್ಗದವರ ಬದುಕಿಗೆ ಶಕ್ತಿ ತುಂಬುವ ಐದು ಗ್ಯಾರಂಟಿಗಳಿಗೆ scp/tsp ಹಣ ಬಳಕೆ ಎಂದು ಬಿಜೆಪಿ ಭಯಾನಕ ಸುಳ್ಳು ಹೇಳುತ್ತಿದೆ. ಇದನ್ನು ನಂಬಬೇಡಿ ದಾಖಲೆಗಳನ್ನು ನೋಡಿ ಬಿಜೆಪಿಯವರಿಗೆ ಪಾಠ ಕಲಿಸಿ ಎಂದರು.

ಸಚಿವಸತೀಶ್ ಜಾರಕಿಹೊಳಿ ಮತ್ತು ದಸಂಸ ಮುಖಂಡ ಡಿ.ಜಿ.ಸಾಗರ್ ಸೇರಿ ಸಂಘಟನೆಯ ಪದಾಧಿಕಾರಿಗಳು ವೇದಿಕೆಯಲ್ಲಿ ಉಪಸ್ಥಿತರಿದ್ದರು.

Related posts

ಶ್ರೇಷ್ಠ ಪರಂಪರೆ ಹೊಂದಿರುವ ದೇಶ ಭಾರತ-ಅಶೋಕ ಹಂಚಲಿ

ಗೊಂದಲದ ಗೂಡಾಗಿರುವ ಜಾತಿಗಣತಿ ವರದಿ ಸ್ವೀಕಾರವಾಗುತ್ತಾ…?

ಕನ್ನಡ ಕಾದಂಬರಿ ಲೋಕಕ್ಕೆ ಕಾಂಗ್ರೆಸ್ ಹೌಸ್ ಕಾದಂಬರಿ ಹೊಸ ರೀತಿ ಸೇರ್ಪಡೆ-ಕವಯಿತ್ರಿ ಸವಿತಾ ನಾಗಭೂಷಣ್