ಶಿವಮೊಗ್ಗ: ಜಗತ್ತಿನ ಅತ್ಯಂತ ಶ್ರೇಷ್ಠ ವೃತ್ತಿ ಶಿಕ್ಷಕರ ಕೆಲಸ ಆಗಿದ್ದು, ವೃತ್ತಿಯ ಗೌರವ ಹೆಚ್ಚಿಸುವ ನಿಟ್ಟಿನಲ್ಲಿ ಕೆಲಸ ಮಾಡುವುದು ಪ್ರತಿಯೊಬ್ಬ ಶಿಕ್ಷಕರ ಪ್ರಯತ್ನ ಮುಖ್ಯ. ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡುವುದು ಶಿಕ್ಷಕರ ಜವಾಬ್ದಾರಿ ಎಂದು ದೇಶಿಯ ವಿದ್ಯಾಶಾಲಾ ಸಮಿತಿ ಕಾರ್ಯದರ್ಶಿ ಎಸ್.ರಾಜಶೇಖರ್ ಹೇಳಿದರು.
ದೇಶಿಯ ವಿದ್ಯಾಶಾಲಾ ಸಮಿತಿ ವತಿಯಿಂದ ಡಿವಿಎಸ್ ಸ್ವತಂತ್ರ ಪಿಯು ಕಾಲೇಜಿನ ಗ್ರಂಥಾಲಯ ಸಭಾಂಗಣದಲ್ಲಿ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ಶಿಕ್ಷಣ ಎನ್ನುವುದು ಸಮಾಜದಲ್ಲಿ ಉತ್ತಮ ವ್ಯಕ್ತಿಗಳ ನಿರ್ಮಾಣ ಮಾಡುವ ಉತ್ತಮ ಕೆಲಸ. ಇಂತಹ ಶ್ರೇಷ್ಠ ಕೆಲಸ ಮಾಡುವ ಶಿಕ್ಷಕರು ಎಲ್ಲ ವಿಷಯಗಳ ಬಗ್ಗೆ ಜ್ಞಾನ ಹೊಂದಿರಬೇಕು. ವಿದ್ಯಾರ್ಥಿಗಳಿಗೆ ಎಲ್ಲ ರೀತಿ ಮಾರ್ಗದರ್ಶನ ನೀಡಬಲ್ಲ ಸಾಮಾರ್ಥ್ಯ ಹೊಂದಿರಬೇಕು ಎಂದು ತಿಳಿಸಿದರು.
ಆಧುನಿಕ ಕಾಲಘಟ್ಟದಲ್ಲಿ ತಂತ್ರಜ್ಞಾನದ ಪರಿಣಾಮಕಾರಿ ಬಳಕೆ ಮಾಡುವುದು ಅತ್ಯಂತ ಅವಶ್ಯಕ. ಇಂದಿನ ಯುಗಕ್ಕೆ ಅಗತ್ಯವಿರುವಂತೆ ವಿದ್ಯಾರ್ಥಿಗಳಿಗೆ ತಂತ್ರಜ್ಞಾನದ ನೆರವಿನಿಂದ ಗುಣಮಟ್ಟದ ಶಿಕ್ಷಣ ನೀಡಲು ಶಿಕ್ಷಕರು ಸಹ ಹೊಸ ವಿಷಯಗಳ ಕಲಿಕೆಯಲ್ಲಿ ನಿರಂತರವಾಗಿ ತೊಡಗಿಸಿಕೊಳ್ಳಬೇಕು ಎಂದರು.
ದೇಶಿಯ ವಿದ್ಯಾಶಾಲಾ ಸಮಿತಿ ಉಪಾಧ್ಯಕ್ಷ ಎಸ್.ಪಿ.ದಿನೇಶ್ ಮಾತನಾಡಿ, ಡಿವಿಎಸ್ ಸಂಸ್ಥೆಯಲ್ಲಿ ಅಧ್ಯಯನ ನಡೆಸಿದ ವಿದ್ಯಾರ್ಥಿಗಳು ರಾಜ್ಯ, ರಾಷ್ಟ್ರೀಯ ಮಟ್ಟದಲ್ಲಿ ಉನ್ನತ ಸ್ಥಾನಗಳಲ್ಲಿ ಕಾರ್ಯ ನಿರ್ವಹಿಸುತ್ತಿದ್ದು, ಸಮಾಜ ಸದೃಢ ಬೆಳವಣಿಗೆಯಲ್ಲಿ ಮಹತ್ತರ ಪಾತ್ರ ವಹಿಸುತ್ತಿದ್ದಾರೆ. ವಿದ್ಯಾರ್ಥಿಗಳು ಅತ್ತ್ಯುತ್ತಮ ಸಾಧನೆ ಮಾಡುವಲ್ಲಿ ಸಂಸ್ಥೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಎಲ್ಲ ಶಿಕ್ಷಕರ ಕೊಡುಗೆ ಇದೆ ಎಂದು ಹೇಳಿದರು.
ದೇಶಿಯ ವಿದ್ಯಾಶಾಲಾ ಸಮಿತಿ ಸಹ ಕಾರ್ಯದರ್ಶಿ ಎ.ಸತೀಶ್ ಕುಮಾರ ಶೆಟ್ಟಿ ಮಾತನಾಡಿ, ಪಠ್ಯ ಬದಲಾವಣೆಯ ವ್ಯವಸ್ಥೆಯ ನಡುವೆಯು ಗುಣಮಟ್ಟದ ಶಿಕ್ಷಣ ನೀಡಬೇಕಿರುವುದು ಶಿಕ್ಷಕರಿಗೆ ಸವಾಲಿನ ಕೆಲಸ ಆಗಿದೆ. ಪಠ್ಯ ವಿಷಯಗಳನ್ನು ಕಲಿಸುವ ಜತೆಯಲ್ಲಿ ವಿದ್ಯಾರ್ಥಿಗಳಿಗೆ ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳುವ ಮಾರ್ಗದರ್ಶನವನ್ನು ಶಿಕ್ಷಕರು ಮಾಡಬೇಕು ಎಂದು ತಿಳಿಸಿದರು.
ದೇಶಿಯ ವಿದ್ಯಾಶಾಲಾ ಸಮಿತಿ ಅಧ್ಯಕ್ಷ ಕೆ.ಎನ್.ರುದ್ರಪ್ಪ ಕೊಳಲೆ ಅಧ್ಯಕ್ಷತೆ ವಹಿಸಿದ್ದರು. 2022-23ನೇ ಸಾಲಿನ ನಿವೃತ್ತ ಸಿಬ್ಬಂದಿಗೆ ದೇಶಿಯ ವಿದ್ಯಾಶಾಲಾ ಸಮಿತಿ ವತಿಯಿಂದ ಅಭಿನಂದಿಸಲಾಯಿತು.
ದೇಶಿಯ ವಿದ್ಯಾಶಾಲಾ ಸಮಿತಿ ಖಜಾಂಚಿ ಬಿ.ಗೋಪಿನಾಥ್, ಶಿಕ್ಷಕ ಪ್ರತಿನಿಧಿ ಎಚ್.ಸಿ.ಉಮೇಶ್, ಡಾ. ಎಂ.ವೆಂಕಟೇಶ್, ಎ.ಇ.ರಾಜಶೇಖರ್, ಎ.ಟಿ.ಪದ್ಮೇಗೌಡ, ಡಿ.ಪೂರ್ಣಿಮಾ, ಆರ್.ಲಕ್ಷ್ಮೀದೇವಿ, ಶ್ರೀಧರ್, ಲಕ್ಷ್ಮಣ್, ಎಂ.ಬಸವರಾಜು ಮತ್ತಿತರರು ಉಪಸ್ಥಿತರಿದ್ದರು.