ಶಿವಮೊಗ್ಗ: ತಾಲೂಕಿನ ಹಸೂಡಿ ಗ್ರಾಪಂ ವ್ಯಾಪ್ತಿಯಲ್ಲಿ ಶಿಥಿಲಾವಸ್ಥೆಯಲ್ಲಿರುವ ಸರ್ಕಾರಿ ಶಾಲಾ ಕಟ್ಟಡಗಳ ದುರಸ್ತಿಗೆ ಅಗತ್ಯ ಅನುದಾನ ನೀಡಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ಸಮ್ಮತಿಸಿದರು.
ಹಸೂಡಿ ಗ್ರಾಪಂ ಅಧ್ಯಕ್ಷೆ ಚೈತ್ರ ಆರ್. ಮೋಹನ್ ಅವರು ಇಂದು ಸೊರಬದ ಸಚಿವರ ನಿವಾಸದಲ್ಲಿ ಭೇಟಿ ಮಾಡಿ ಈ ಸಂಬಂಧ ಮನವಿ ಅರ್ಪಿಸಿದರು. ಕೂಡಲೇ ಇದಕ್ಕೆ ಸ್ಪಂದಿಸಿದ ಸಚಿವರು ಅನುದಾನ ಬಿಡುಗಡೆಗಾಗಿ ಸಂಬಂಧಿತ ಇಲಾಖೆ ಅಧಿಕಾರಿಗೆ ಸೂಚಿಸಿದರು.
ಹಳ್ಳಿಗಳಲ್ಲಿರುವ ಸರ್ಕಾರಿ ಶಾಲೆಗಳಲ್ಲಿ ಮೂಲ ಸೌಕರ್ಯಗಳ ಕೊರತೆ ಇದೆ. ಅಲ್ಲದೆ ಹಲವು ಕಡೆ ಶಾಲಾ ಕಟ್ಟಡಗಳು ಶಿಥಲಾವಸ್ಥೆಯಲ್ಲಿವೆ. ಗ್ರಾಮಾಂತರ ಭಾಗದ ಸರ್ಕಾರಿ ಶಾಲೆಗಳ ಶೈಕ್ಷಣಿಕ ಗುಣಮಟ್ಟ ಸುಧಾರಣೆಯೊಂದಿಗೆ ಕಟ್ಟಡ, ಕುಡಿಯುವ ನೀರು, ಶೌಚಾಲಯ ಸೇರಿದಂತೆ ಮತ್ತಿತರೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಬೇಕಾಗಿದೆ. ಈ ನಿಟ್ಟಿನಲ್ಲಿ ಅಗತ್ಯ ಅನುದಾನ ನೀಡಬೇಕೆಂದು ಮನವಿ ಪತ್ರದಲ್ಲಿ ಕೋರಲಾಗಿತ್ತು.
ಮನವಿ ಅರ್ಪಿಸುವ ಸಂದರ್ಭದಲ್ಲಿ ಕೆಪಿಸಿಸಿ ಸಂಯೋಜಕ, ಅಖಿಲ ಕರ್ನಾಟಕ ಡಿ.ಕೆ. ಶಿವಕುಮಾರ್ ಅಭಿಮಾನಿಗಳ ಸಂಘದ ಜಿಲ್ಲಾಧ್ಯಕ್ಷ ಆರ್. ಮೋಹನ್, ಶಂಕರಘಟ್ಟ ರಮೇಶ್ ಶೆಟ್ಟಿ, ಜಿ.ಡಿ. ಮಂಜುನಾಥ್, ರಮೇಶ್ ಗೌಡ, ಅಖಿಲ ಕರ್ನಾಟಕ ಡಿ.ಕೆ. ಶಿವಕುಮಾರ್ ಅಭಿಮಾನಿಗಳ ಸಂಘದ ಶಿಕಾರಿಪುರ ತಾಲೂಕು ಅಧ್ಯಕ್ಷ ಸುರೇಶ್, ಸಂತೋಷ್, ತಮಿಳು ಸಮಾಜದ ಮುಖಂಡ ಲಕ್ಷಾಧಿ ಮತ್ತಿತರರು ಉಪಸ್ಥಿತರಿದ್ದರು.