ಶಿವಮೊಗ್ಗ: ಸಮಾಜಮುಖಿ ಚಟುವಟಿಕೆಗಳಲ್ಲಿ ಮಹಿಳಾ ಸಂಘ ಸಂಸ್ಥೆಗಳು ಅಪಾರ ಸೇವೆ ಸಲ್ಲಿಸುತ್ತಿರುವುದು ಅಭಿನಂದನೀಯ. ಅಗತ್ಯ ಇರುವವರಿಗೆ ನೆರವು ಒದಗಿಸುವ ಕೆಲಸ ಸಾರ್ಥಕ ಭಾವ ಮೂಡಿಸುತ್ತದೆ ಎಂದು ದೇಶಿಯ ವಿದ್ಯಾಶಾಲಾ ಸಮಿತಿ ಉಪಾಧ್ಯಕ್ಷ ಎಸ್.ಪಿ.ದಿನೇಶ್ ಹೇಳಿದರು.
ಶಿವಮೊಗ್ಗ ನಗರದ ಮಥುರಾ ಪಾರಾಡೈಸ್ ಸಭಾಂಗಣದಲ್ಲಿ ಜೆಸಿಐ ಶಿವಮೊಗ್ಗ ಭಾವನಾ ಸಂಸ್ಥೆ ವತಿಯಿಂದ ಆಯೋಜಿಸಿದ್ದ ಜೆಸಿಐ ಸಪ್ತಾಹ ಸಮಾರೋಪ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.
ಮಹಿಳೆಯರು ಪ್ರತಿಯೊಂದು ಕ್ಷೇತ್ರಗಳಲ್ಲಿ ಉನ್ನತ ಸಾಧನೆ ಮಾಡುತ್ತಿದ್ದು, ಸಾಮಾಜಿಕ ಕಳಕಳಿಯುಳ್ಳ ಸೇವಾ ಕ್ಷೇತ್ರದಲ್ಲೂ ಪರಿಣಾಮಕಾರಿ ಕೆಲಸ ಮಾಡುತ್ತಿದ್ದಾರೆ. ಯುವ ಸಮೂಹಕ್ಕೆ ಮಾದರಿಯಾಗಿ ಕೆಲಸ ಮಾಡುತ್ತಿದ್ದು, ಇದರಿಂದ ಸಾವಿರಾರು ಜನರಿಗೆ ಸ್ಪೂರ್ತಿಯಾಗಿದೆ ಎಂದು ತಿಳಿಸಿದರು.
ಜೆಸಿಐ ಸಂಸ್ಥೆ ವತಿಯಿಂದ ಕಮಲ ಪತ್ರ ಪುರಸ್ಕಾರ ಸ್ವೀಕರಿಸಿ ಮಾತನಾಡಿದ ಪಾಲಿಕೆ ಸದಸ್ಯೆ ಸುರೇಖಾ ಮುರಳೀಧರ್, ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳುವ ಜತೆಯಲ್ಲಿ ನಾಯಕತ್ವ ಗುಣ ಬೆಳೆಸುವಲ್ಲಿ ಜೆಸಿಐ ಸಂಸ್ಥೆ ಮಹತ್ತರ ಪಾತ್ರ ವಹಿಸುತ್ತದೆ. ಜೆಸಿಐ ಸಂಸ್ಥೆಯಲ್ಲಿ ಪ್ರತಿಯೊಬ್ಬರೂ ಭಾಗಿಯಾಗಬೇಕು. ಸಂಘಟನಾ ಕೌಶಲ್ಯ ವೃದ್ಧಿಯಾಗುತ್ತದೆ ಎಂದು ಹೇಳಿದರು.
ಜೆಸಿಐ ಶಿವಮೊಗ್ಗ ಭಾವನಾ ಅಧ್ಯಕ್ಷೆ ಪೂರ್ಣಿಮಾ ಸುನೀಲ್ ಮಾತನಾಡಿ, ಜೆಸಿಐ ಸಪ್ತಾಹ ಕಾರ್ಯಕ್ರಮವು ಅತ್ಯಂತ ಯಶಸ್ವಿಯಾಗಿ ನಡೆದಿದ್ದು, ಎಲ್ಲ ಸದಸ್ಯರ ಸಹಕಾರದಿಂದ ಸೇವಾ ಚಟುವಟಿಕೆಗಳು ಉತ್ತಮವಾಗಿ ಪೂರ್ಣಗೊಂಡಿದೆ. ಜೆಸಿಐ ಭಾವನಾ ಸಂಸ್ಥೆ ನಡೆಸಿದ ಕಾರ್ಯವು ರಾಷ್ಟ್ರ ಮಟ್ಟದಲ್ಲಿ ಗುರುತಿಸಲ್ಪಟ್ಟಿರುವುದು ಅತ್ಯಂತ ಹೆಮ್ಮೆಯ ಸಂಗತಿ ಎಂದು ತಿಳಿಸಿದರು.
ಶಿಲ್ಪಿ ಕಾಶೀನಾಥ್, ಪಾಲಿಕೆ ಸದಸ್ಯೆ ರೇಖಾ ರಂಗನಾಥ್, ವೈದ್ಯೆ ಡಾ. ಲಲಿತಾ ಭರತ್, ಹಿರಿಯ ಪತ್ರಕರ್ತ ಆರುಂಡಿ ಶ್ರೀನಿವಾಸಮೂರ್ತಿ, ಭವಾನಿ, ಸೌಮ್ಯ ಹರಳಪ್ಪ ಅವರನ್ನು ಜೆಸಿಐ ಶಿವಮೊಗ್ಗ ಭಾವನಾ ಸಂಸ್ಥೆ ವತಿಯಿಂದ ಸನ್ಮಾನಿಸಲಾಯಿತು.
ರೋಟರಿ ಮಾಜಿ ಸಹಾಯಕ ಗವರ್ನರ್ ಜಿ.ವಿಜಯ್ಕುಮಾರ್, ಜೆಸಿ ಗೌರೀಶ್ ಭಾರ್ಗವ್, ಜೆಸಿ ಸಪ್ತಾಹ ಸಂಚಾಲಕ ಪ್ರದೀಪ್, ಶಾರದಾ ಶೇಷಗಿರಿಗೌಡ, ಸುಗುಣಾ ಸತೀಶ್, ಕರಿಬಸಮ್ಮ, ಜೆಸಿಐ ಶಿವಮೊಗ್ಗ ಭಾವನಾ ಕಾರ್ಯದಶಿ ಕವಿತಾ ಜೋಯೀಸ್ ಸುನೀಲ್ ಮತ್ತಿತರರು ಉಪಸ್ಥಿತರಿದ್ದರು.