ಶಿವಮೊಗ್ಗ: ತಮಿಳುನಾಡಿಗೆ ಕಾವೇರಿ ನದಿ ನೀರು ಬಿಡಬಾರದು ಎಂದು ಆಗ್ರಹಿಸಿ ಕರ್ನಾಟಕ ನಾಡು ರಕ್ಷಣಾ ವೇದಿಕೆ ಕಾರ್ಯಕರ್ತರು ಇಂದು ರಸ್ತೆ ತಡೆ ಮೂಲಕ ಪ್ರತಿಭಟನೆ ನಡೆಸಿದರು.
ಕಾವೇರಿ ನೀರು ಹಂಚಿಕೆ ವಿಷಯದಲ್ಲಿ ರಾಜ್ಯಕ್ಕೆ ಯಾವಾಗಲೂ ಅನ್ಯಾಯವಾಗುತ್ತಿದೆ. ಮಳೆಗಾಲವಾದರೆ ತೊಂದರೆಯಿಲ್ಲ. ಆದರೆ ರಾಜ್ಯದಲ್ಲಿ ಈ ಬಾರಿ ಭೀಕರ ಬರಗಾಲವಿದೆ. ನದೀಪಾತ್ರದಲ್ಲಿ ನೀರೇ ಇಲ್ಲ. ಕುಡಿಯುವ ನೀರಿಗೂ ಹಾಹಾಕಾರವಾಗಿದೆ. ಇಂತಹ ಸಂಕಷ್ಟದ ಸಂದರ್ಭದಲ್ಲಿ ತಮಿಳುನಾಡಿಗೆ ಪ್ರತಿದಿನ 5 ಸಾವಿರ ಕ್ಯೂಸೆಕ್ ನೀರು ಬಿಡುವಂತೆ ಸುಪ್ರೀಂ ಕೋರ್ಟ್ ತೀರ್ಪು ನೀಡಿರುವುದು ವಿಷಾದನೀಯ ಎಂದು ಪ್ರತಿಭಟನಕಾರರು ತಿಳಿಸಿದರು.
ರಾಜ್ಯ ಸರ್ಕಾರ ಸುಪ್ರೀಂ ಕೋರ್ಟಿಗೆ ಪರಿಸ್ಥಿತಿಯನ್ನು ಮನವರಿಕೆ ಮಾಡಿಕೊಡುವಲ್ಲಿ ವಿಫಲವಾಗಿದೆ. ತಮಿಳುನಾಡು ಕೇಳುತ್ತಿರುವುದು ಕೃಷಿ ಚಟುವಟಿಕೆಗೆ. ಆದರೆ ಇಲ್ಲಿ ಕುಡಿಯಲು ನೀರೇ ಇಲ್ಲ. ಕೂಡಲೇ ತಮಿಳುನಾಡಿಗೆ ಬಿಡುತ್ತಿರುವ ನೀರನ್ನು ಸ್ಥಗಿತಗೊಳಿಸಬೇಕು. ಸುಪ್ರೀಂ ಕೋರ್ಟಿಗೆ ಮೇಲ್ಮನವಿ ಸಲ್ಲಿಸಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.
ಈ ಸಂದರ್ಭದಲ್ಲಿ ಸಂಸ್ಥಾಪಕ ರಾಜ್ಯಾಧ್ಯಕ್ಷ ಪ್ರಸನ್ನ ಗೌಡ್ರು, ಜಿಲ್ಲಾಧ್ಯಕ್ಷ ಎಸ್.ಎಂ. ದಿನೇಶ್, ಪ್ರಧಾನ ಕಾರ್ಯದರ್ಶಿ ಸಂಕೇತ್ ಎನ್. ಶೇಟ್ ಸೇರಿದಂತೆ ಹಲವರಿದ್ದರು.