ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಮತ್ತು ಉದ್ಯೋಗಾಕಾಂಕ್ಷಿಗಳಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ. ನವೆಂಬರ್ ನಲ್ಲಿ 7ನೇ ವೇತನ ಆಯೋಗ ಜಾರಿಗೆ ಸಿದ್ಧತೆ ಮತ್ತು ಮುಂದಿನ ಐದು ವರ್ಷಗಳಲ್ಲಿ 2.50 ಲಕ್ಷ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್ ತಿಳಿಸಿದ್ದಾರೆ.
ಈ ಕುರಿತು ಮಾತನಾಡಿರುವ ಸಚಿವ ಡಾ.ಜಿ.ಪರಮೇಶ್ವರ್, ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಣೆ ಸಂಬಂಧ ರಚಿಸಿರುವ 7ನೇ ವೇತನ ಆಯೋಗ ಮುಂದಿನ ನವೆಂಬರ್ ಒಳಗೆ ವರದಿ ಸಲ್ಲಿಸಲಿದ್ದು, ವರದಿ ಬಳಿಕ ಅನುಷ್ಠಾನದ ಬಗ್ಗೆ ರಾಜ್ಯ ಸರ್ಕಾರ ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದೆ. ನವೆಂಬರ್ ಒಳಗೆ ವರದಿ ಸಲ್ಲಿಸುವಂತೆ ವೇತನ ಆಯೋಗಕ್ಕೆ ಸೂಚಿಸಲಾಗಿದೆ. ವರದಿ ಬಂದ ನಂತರ ನಿರ್ಧಾರ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಈಗಾಗಲೇ ಭರವಸೆ ನೀಡಿದ್ದಾರೆ. ವೇತನ ಆಯೋಗ ಜಾರಿಯಾಗಲಿದ್ದು, ನೌಕರರು ಆತಂಕಪಡುವ ಅಗತ್ಯವಿಲ್ಲ ಎಂದು ಹೇಳಿದರು.
7ನೇ ವೇತನ ಆಯೋಗದ ಸಮಿತಿಗೆ ಬೇಡಿಕೆ ಸಲ್ಲಿಸಿದ ರಾಜ್ಯ ಸರ್ಕಾರಿ ಸಚಿವಾಲಯದ ನೌಕರರ ಸಂಘ ಹೊಸ ಪಿಂಚಣಿ ಯೋಜನೆ (ಎನ್ಪಿಎಸ್) ರದ್ದುಪಡಿಸಿ ಹಳೆಯ ಪಿಂಚಣಿ ಯೋಜನೆ (ಒಪಿಎಸ್) ಜಾರಿಗೆ ತರಲು ಸರ್ಕಾರ ಬದ್ಧವಾಗಿದ್ದು, ವರದಿ ನೀಡಲು ಸಮಿತಿ ರಚಿಸಲಾಗಿದೆ. ವರದಿ ಬಂದ ನಂತರ ಜಾರಿ ಮಾಡಲಾಗುವುದು. ವಿಧಾನಸಭೆ ಚುನಾವಣೆ ಪ್ರಣಾಳಿಕೆಯಲ್ಲಿ ಒಪಿಎಸ್ ಜಾರಿ ಮಾಡುವುದಾಗಿ ಕಾಂಗ್ರೆಸ್ ಭರವಸೆ ನೀಡಿದೆ. ಅದರಂತೆ ಸರ್ಕಾರ ನಡೆದುಕೊಳ್ಳಲಿದ್ದು, ಜಾರಿ ಮಾಡಿಯೇ ತೀರುತ್ತೇವೆ ಎಂದು ಭರವಸೆ ನೀಡಿದರು.
ಎಲ್ಲಾ ಸರ್ಕಾರಿ ನೌಕರರು ಹಾಗೂ ಅವರ ಕುಟುಂಬದವರಿಗೆ ಉಚಿತವಾಗಿ ಆರೋಗ್ಯ ಸೇವೆ ಒದಗಿಸುವ ‘ಕರ್ನಾಟಕ ಆರೋಗ್ಯ ಸಂಜೀವಿನಿ’ ಯೋಜನೆಯೂ ಶೀಘ್ರವೇ ಜಾರಿಯಾಗಲಿದೆ ಎಂದು ತಿಳಿಸಿದರು.
ಮುಂದಿನ 5 ವರ್ಷದಗೊಳಗೆ ಖಾಲಿಯಿರುವ 2.50 ಲಕ್ಷ ಹುದ್ದೆಗಳ ಭರ್ತಿ
ರಾಜ್ಯದಲ್ಲಿ 5.25 ಲಕ್ಷ ಸರ್ಕಾರಿ ನೌಕರರು ಇದ್ದು, ಇನ್ನೂ 2.50 ಲಕ್ಷ ಹುದ್ದೆಗಳು ಖಾಲಿ ಉಳಿದಿವೆ. ಚುನಾವಣೆ ಪ್ರಣಾಳಿಕೆಯಲ್ಲಿ ಈ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಭರವಸೆ ನೀಡಿದ್ದು, ಮುಂದಿನ ಐದು ವರ್ಷಗಳಲ್ಲಿ ನೇಮಕ ಮಾಡಲಾಗುವುದು ಎಂದರು. ರಾಜ್ಯದ ಆಡಳಿತ ವ್ಯವಸ್ಥೆ ದೇಶದಲ್ಲೇ ಮಾದರಿಯಾಗಿದ್ದು, ‘ಕರ್ನಾಟಕ ಮಾದರಿ’ ಎನ್ನುವಂತಾಗಿದೆ.
ಅದಕ್ಕೆ ನೌಕರ ವರ್ಗದ ಬದ್ಧತೆ ಕಾರಣವಾಗಿದೆ. ದಕ್ಷತೆ, ಪ್ರಾಮಾಣಿಕತೆಯಿಂದ ಕೆಲಸ ಮಾಡಿದರೆ ಸರ್ಕಾರಕ್ಕೆ ಒಳ್ಳೆಯ ಹೆಸರು ಬರುತ್ತದೆ. ಕ್ರೀಡೆ ನೌಕರರ ಜೀವನದ ಒಂದು ಭಾಗವಾದರೆ ಆರೋಗ್ಯ ಸುಧಾರಿಸಿ ಸರಿಯಾಗಿ ಕರ್ತವ್ಯ ನಿರ್ವಹಿಸಲು ಸಾಧ್ಯವಾಗುತ್ತದೆ. ಇಂತಹ ಸದುದ್ದೇಶದಿಂದಲೇ ಕ್ರೀಡಾಕೂಟಕ್ಕೆ ರಾಜ್ಯ ಸರ್ಕಾರ ರೂ.3.50 ಕೋಟಿ ಹಣ ನೀಡಿದೆ ಎಂದು ಹೇಳಿದರು.