ಬೆಂಗಳೂರು: ರಾಜ್ಯರಾಜಧಾನಿ ಬೆಂಗಳೂರಿನಲ್ಲಿ ನಿನ್ನೆ ರಾತ್ರಿ ಸುರಿದ ಮಳೆಯಿಂದಾಗಿ ಜನರು ತತ್ತರಿಸಿದ್ದು, ಮಳೆಯಿಂದ ಮನೆಗಳಿಗೆ ಮಳೆ ನೀರು ನುಗ್ಗಿ ಅವಾಂತರ ಸೃಷ್ಠಿಯಾಗಿದೆ.
ನಿನ್ನೆ ರಾತ್ರಿ ಬೆಂಗಳೂರು ಮೈಸೂರು, ಮಂಡ್ಯ ಸೇರಿದಂತೆ ಹಲವು ಕಡೆಗಳಲ್ಲಿ ಭಾರಿ ಮಳೆಯಾಗಿದೆ. ಬೆಂಗಳೂರು ನಗರದ ಹಲವು ಪ್ರದೇಶಗಳಲ್ಲಿ ಹೆಚ್ಚು ಮಳೆ ದಾಖಲಾಗಿದೆ. ಬೆಂಗಳೂರಿನಲ್ಲಿ ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗಿತ್ತು. ಅಂಡರ್ಪಾಸ್ಗಳಲ್ಲಿ ನೀರು ನಿಂತು ಪ್ರಯಾಣಿಕರು ಪರದಾಡುವಂತಾಯಿತು. ಭಾರಿ ಮಳೆಯಾಗುತ್ತಿದ್ದಂತೆ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿಕೆ ಶಿವಕುಮಾರ್ ಬಿಬಿಎಂಪಿಯ ವಾರ್ ರೂಂಗೆ ದಿಢೀರ್ ಭೇಟಿ ನೀಡಿದ್ದರು.
ತಡರಾತ್ರಿ ಬಿಬಿಎಂಪಿಯ ವಾರ್ ರೂಂಗೆ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಭೇಟಿ ನೀಡಿದರು.
ಮಳೆಯಿಂದಾಗಿ ನಗರದ ವಿವಿಧ ಭಾಗಗಳಲ್ಲಿ ಉಂಟಾಗಿರುವ ಸಮಸ್ಯೆಗಳನ್ನು ಪರಿಶೀಲಿಸಿ, ವಾರ್ ರೂಮ್ ಗೆ ಬಂದ ಕರೆ ಸ್ವೀಕರಿಸಿ ಮಾತನಾಡಿದರು. ಬಿಬಿಎಂಪಿ ಕೇಂದ್ರ ಕಚೇರಿಯ ಕಂಟ್ರೋಲ್ ರೂಂ, ಇಂಟಿಗ್ರೇಟೆಡ್ ಕಮಾಂಡ್ ಸೆಂಟರ್ ಗಳಿಗೆ ಭೇಟಿ ನೀಡಿ ಮಳೆಯಿಂದ ಉಂಟಾದ ಅನಾಹುತಗಳ ಪರಿವೀಕ್ಷಣೆ ಮಾಡಿದರು.
ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಸೇರಿದಂತೆ ಹಿರಿಯ ಅಧಿಕಾರಿಗಳು, ವಿಪತ್ತು ನಿರ್ವಹಣಾ ಕೇಂದ್ರದ ಅಧಿಕಾರಿಗಳು ಉಪಸ್ಥಿತರಿದ್ದು, ಸಾರ್ವಜನಿಕರ ದೂರುಗಳಿಗೆ ಸ್ಪಂದಿಸಿದರು.
8 ವಲಯಗಳ ಆಯುಕ್ತರು, ಜಂಟಿ ಆಯುಕ್ತರು, ಮುಖ್ಯ ಅಭಿಯಂತರರು ಆಯಾ ವಲಯಗಳಲ್ಲಿ ನಿನ್ನೆ ರಾತ್ರಿಯಿಂದ ಇಂದು ಬೆಳಗಿನವರೆಗೆ ಕಾರ್ಯನಿರ್ವಹಿಸಿ, ಮಳೆಯಿಂದಾದ ಅನಾಹುತಗಳನ್ನು ಪರಿವೀಕ್ಷಿಸಿದರು.
ಈಗ ವಿಪತ್ತು ನಿರ್ವಹಣಾ ಕೋಶದ ಅಧಿಕಾರಿಗಳು ಅವಘಡಗಳು ಸಂಭವಿಸಿದ ಸ್ಥಳಗಳಲ್ಲಿ ಹಾಜರಿದ್ದು, ನೀರನ್ನು ತೆರವು ಗೊಳಿಸುತ್ತಿದ್ದಾರೆ.