ಬೆಂಗಳೂರು: ಇಂದು ಡಾ.ಬಾಬು ರಾಜೇಂದ್ರ ಪ್ರಸಾದ್, ಡಾ.ಬಿ.ಆರ್. ಅಂಬೇಡ್ಕರ್ ಸೇರಿದಂತೆ ಸಂವಿಧಾನ ರಚನಾ ಸಮಿತಿಯ ಎಲ್ಲ ಸದಸ್ಯರನ್ನು ನೆನಪಿಸಿಕೊಳ್ಳಬೇಕು. ಅಂಬೇಡ್ಕರ್ ಅವರು ಸಂವಿಧಾನ ರಚನಾ ಸಮಿತಿಯ ಅಧ್ಯಕ್ಷರಾಗಿದ್ದರು. ಭಾರತದ ಸಂವಿಧಾನ ಶ್ರೇಷ್ಠವಾದುದು. ಸಂವಿಧಾನ ಎಷ್ಟೇ ಶ್ರೇಷ್ಠವಾಗಿದ್ದರೂ, ಸರಿಯಾದ ಕೈಗಳಲ್ಲಿ ಸಂವಿಧಾನವಿರದಿದ್ದರೆ ಸಂವಿಧಾನ ಸಾರ್ಥಕವಾಗುವುದಿಲ್ಲ ಎಂದು ಅಂಬೇಡ್ಕರ್ ಅವರು ಎಚ್ಚರಿಕೆಯ ಮಾತುಗಳನ್ನು ನುಡಿದಿದ್ದರು. ಸಂವಿಧಾನದ ಪರವಾಗಿರುವ ಕೈಗಳಲ್ಲಿ ಇದ್ದಾಗ ಮಾತ್ರ, ಸಂವಿಧಾನದ ಧ್ಯೇಯೋದ್ದೇಶಗಳನ್ನು ಸಾಧಿಸಿದಂತಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ವಿಧಾನಸೌಧದಲ್ಲಿ ಸಂವಿಧಾನ ದಿನಾಚರಣೆಯ ಅಂಗವಾಗಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಪುಷ್ಪಾರ್ಚನೆ ಮಾಡಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.
ಭಾರತದ ಸಂವಿಧಾನ ಅತ್ಯಂತ ಶ್ರೇಷ್ಠವಾಗಿದ್ದು, ಭಾರತದ ದೇಶದ ಎಲ್ಲರಿಗೂ ಹಕ್ಕುಗಳ ರಕ್ಷಣೆ ಹಾಗೂ ಮಾನವೀಯತೆಯೇ ಸಂವಿಧಾನದ ಆಶಯ. ಇಂದು ಸಂವಿಧಾನ ಅಂಗೀಕರಾವಾದ ದಿನ. 1949,ರ ನವೆಂಬರ್ 26 ರಂದು ಭಾರತದ ಸಂವಿಧಾನ ರಚನಾ ಸಭೆಯ ಅಧ್ಯಕ್ಷರಾಗಿದ್ದ ಡಾ. ಬಾಬುರಾಜೇಂದ್ರ ಪ್ರಸಾದ್ ಅವರಿಗೆ ಭಾರತದ ಸಂವಿಧಾನವನ್ನು ಸಲ್ಲಿಸಿದ ನಂತರ ಸಂವಿಧಾನ ಅಂಗೀಕಾರವಾಯಿತು. ಆದ್ದರಿಂದ ಈ ದಿನವನ್ನು ಸಂವಿಧಾನ ದಿನವೆಂದು ಇಡೀ ದೇಶದಲ್ಲಿ ಆಚರಿಸಲಾಗುತ್ತದೆ ಎಂದರು.