ಮಂಡ್ಯ: ರಾಜ್ಯ ಸರ್ಕಾರ ತಮಿಳುನಾಡಿಗೆ ಕಾವೇರಿ ನೀರು ಹರಿಸಿದ ಪರಿಣಾಮ ಇದೀಗ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನಲ್ಲಿರುವ ಕೆಆರ್ ಎಸ್ ಜಲಾಶಯದ ನೀರಿನ ಮಟ್ಟ ಮತ್ತಷ್ಟು ಕುಸಿದಿದೆ.
ರಾಜ್ಯದಲ್ಲಿ ವಾಡಿಕೆಯಂತೆ ಮಳೆಯಾಗದೇ ಕೆಆರ್ ಎಸ್ ಜಲಾಶಯ ಭರ್ತಿಯಾಗಿಲ್ಲ. ಇದರಿಂದಾಗಿ ರೈತರು ಕಾವೇರಿ ಜಲಾನಯನ ಭಾಗದ ಜನರು ಸಂಕಷ್ಟಕ್ಕೀಡಾಗಿದ್ದಾರೆ. ಈ ನಡುವೆಯೂ ಸಹ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ತಮಿಳುನಾಡಿಗೆ ಪ್ರತಿನಿತ್ಯ 5 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಆದೇಶಿಸಿತ್ತು. ಅದರಂತೆ ರಾಜ್ಯ ಸರ್ಕಾರ ತಮಿಳುನಾಡಿಗೆ ನೀರು ಹರಿಸಿದ್ದು ಈ ಹಿನ್ನೆಲೆಯಲ್ಲಿ ಕೆಆರ್ ಎಸ್ ಜಲಾಶಯದ ನೀರಿನ ಮಟ್ಟ 97 ಅಡಿಗೆ ಕುಸಿದಿದೆ.
ಜಲಾಶಯದಲ್ಲಿ ಪ್ರಸ್ತುತ ಕೇವಲ 21 ಟಿಎಂಸಿ ನೀರಿದೆ. ಜಲಾಶಯಕ್ಕೆ 3502 ಕ್ಯೂಸೆಕ್ ನೀರು ಒಳಹರಿವು ಇದ್ದು, 4253 ಕ್ಯೂಸೆಕ್ ಹೊರ ಹೋಗುತ್ತಿದೆ.