ಶಿವಮೊಗ್ಗ: ನೈರುತ್ಯ ಶಿಕ್ಷಕರ ಕ್ಷೇತ್ರಕ್ಕೆ ನಡೆಯಲಿರುವ ಚುನಾವಣೆಯಲ್ಲಿ ನಾನು ಪ್ರಬಲ ಆಕಾಂಕ್ಷಿಯಾಗಿದ್ದು, ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ಸಿಗುವ ಭರವಸೆ ಇದೆ ಎಂದು ಜಿಲ್ಲಾ ಕಾಂಗ್ರೆಸ್ ವಕ್ತಾರ ಎಂ. ರಮೇಶ್ ಶೆಟ್ಟಿ ತಿಳಿಸಿದರು.
ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, 2024ರ ಜೂನ್ನಲ್ಲಿ ನೈರುತ್ಯ ಪದವೀಧರರ ಹಾಗೂ ಶಿಕ್ಷಕರ ಕ್ಷೇತ್ರಕ್ಕೆ ಚುನಾವಣೆ ನಡೆಯಲಿದ್ದು, ಶಿವಮೊಗ್ಗ, ಮಂಗಳೂರು, ಉಡುಪಿ, ಚಿತ್ರದುರ್ಗ, ಚಿಕ್ಕಮಗಳೂರು, ಕೊಡಗು, ದಾವಣಗೆರೆ ಜಿಲ್ಲೆಯ ಹೊನ್ನಾಳಿ, ನ್ಯಾಮತಿ ತಾಲೂಕು ಸೇರಿದಂತೆ 30 ವಿಧಾನಸಭಾ ಕ್ಷೇತ್ರಗಳು ಈ ಕ್ಷೇತ್ರದ ವ್ಯಾಪ್ತಿಗೆ ಬರಲಿವೆ ಎಂದರು.
ಚುನಾವಣೆ ನೊಂದಣಿ ಕಾರ್ಯ ಭರದಿಂದ ಸಾಗುತ್ತಿದ್ದು, ಈಗಾಗಲೇ ಮಂಗಳೂರು ಹಾಗೂ ಉಡುಪಿ ಜಿಲ್ಲೆಗಳಲ್ಲಿ ಪ್ರವಾಸ ಮಾಡಿ, ನೊಂದಣಿ ಮಾಡಿಸಲಾಗುತ್ತಿದೆ. 35 ಸಾವಿರಕ್ಕೂ ಹೆಚ್ಚು ಅರ್ಜಿಗಳನ್ನು ಪಕ್ಷದ ಕಾರ್ಯಕರ್ತರು ನೀಡಿದ್ದಾರೆ. 2018ರಲ್ಲಿ ಇದ್ದ ಮತದಾರ ಪಟ್ಟಿ ಈ ಚುನಾವಣೆಗೆ ಅನ್ವಯವಾಗುತ್ತಿಲ್ಲ. ಮತದಾರರಿಗೆ ಹೊಸದಾಗಿ ನೊಂದಣಿ ಮಾಡಿಸುವುದು ಕಡ್ಡಾಯವಾಗಿರುವುದರಿಂದ ಪಕ್ಷದಿಂದ ನೊಂದಣಿ ಮಾಡಿಸುತ್ತಿರುವುದರಿಂದ ಚುನಾವಣೆಯಲ್ಲಿ ನೊಂದಣಿ ಪರಿಣಾಮಕಾರಿಯಾಗಲಿದೆ ಎಂದರು.
ಚುನಾವಣೆಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳು ಕರೆದಿದ್ದ ಸಭೆಯಲ್ಲಿ ಆಯಾ ಇಲಾಖೆಗಳಿಗೆ ಸಂಬಂಧಪಟ್ಟಂತೆ ನೊಂದಣಿ ಮಾಡಿಸಲು ಸಲಹೆ ನೀಡಿದ್ದು, ಅದರಂತೆ ಜಿಲ್ಲಾಧಿಕಾರಿಗಳು ನೊಂದಣಿಗೆ ಆಯಾ ಇಲಾಖೆಗಳಿಗೆ ಸೂಚನೆ ನೀಡಿರುವುದರಿಂದ ಅವರಿಗೆ ಅಭಿನಂದನೆಗಳು.
ಕಳೆದ ಬಾರಿ ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ಸಿಗದ ಕಾರಣ ಪಕ್ಷೇತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದೆ . ಅತ್ಯಂತ ಕಡಿಮೆ ಅಂತರದಲ್ಲಿ ಸೋಲು ಕಂಡಿದ್ದೆ. ಆದರೆ ಈ ಬಾರಿ ಪಕ್ಷದಿಂದಲೇ ಟಿಕೆಟ್ ಸಿಗುವ ನಿರೀಕ್ಷೆ ಇರುವುದರಿಂದ ಗೆಲುವು ಕಾಣುತ್ತೇನೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.
ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷ ಕೂಡ ಈ ಚುನಾವಣೆಯಲ್ಲಿ ಆಸಕ್ತಿ ವಹಿಸಿದೆ. ಜಿಲ್ಲಾ ಉಸ್ತುವರಿ ಸಚಿವರಾದ ಮಧು ಬಂಗಾರಪ್ಪ ಅವರು ಸೇರಿದಂತೆ ಮುಖಂಡರುಗಳಾದ ಹೆಚ್.ಎಸ್. ಸುಂದರೇಶ್, ಆರ್.ಎಂ. ಮಂಜುನಾಥ ಗೌಡ, ಕಿಮ್ಮನೆ ರತ್ನಾಕರ್, ಬಿ.ಕೆ. ಸಂಗಮೇಶ್,ಬೇಳೂರು ಗೋಪಾಲಕೃಷ್ಣ, ಡಾ. ಮಂಜುನಾಥ ಭಂಡಾರಿ ಹಾಗೂ ಹಿರಿಯರಾದ ಕಾಗೋಡು ತಿಮ್ಮಪ್ಪನವರ ಹಾರೈಕೆಯೊಡನೆ ಈಗಾಗಲೇ ಕೆಲಸ ಮಾಡುತ್ತಿದ್ದೇನೆ.. ಪದವಿ ಮತ್ತು ಶಿಕ್ಷಕರ ಕ್ಷೇತ್ರ ಎರಡೂ ಕ್ಷೇತ್ರಗಳಲ್ಲೂ ಕಾಂಗ್ರೆಸ್ ಗೆಲುವು ಸಾಧಿಸಲಿದೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾದ ರಾಜ್ಯ ಕೆಪಿಸಿಸಿ ಪ್ರದಾನ ಕಾರ್ಯದರ್ಶಿ ಪಿ.ಓ.ಶಿವಕುಮಾರ್, ರಾಜ್ಯ ಕೋಆರ್ಡಿನೇಟರ್ ಅರ್. ಮೋಹನ್, ಯು. ರಾಜ್ಯ ಹಿಂದುಳಿದ ವರ್ಗಗಳ ಜಿಲ್ಲಾ ಅಧ್ಯಕ್ಷ ರಮೇಶ್ ಇಕ್ಕೇರಿ, ಜಿಲ್ಲಾ ಪ್ರದಾನ ಕಾರ್ಯದರ್ಶಿ ಯು. ಶಿವಾನಂದ್, ಯುವ ಮುಖಂಡ ಗಿತೇಂದ್ರ ಗೌಡ, ಕಾರ್ಯದರ್ಶಿ ರಾಮಚಂದ್ರ ನಾಯಕ್ ಉಪಸ್ಥಿತರಿದ್ದರು.