ಕನ್ನಡಿಗರ ಪ್ರಜಾನುಡಿ
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಗಡುವು ಮುಗಿದರೂ ಆಸ್ತಿ ವಿವರ ಸಲ್ಲಿಸದ ಶಾಸಕರು: ಲೋಕಾಯುಕ್ತದಿಂದ ಹೆಸರು ಪ್ರಕಟ.

ಬೆಂಗಳೂರು:  ಗಡುವು ಮುಗಿದರೂ ಆಸ್ತಿ ವಿವರ  ಸಲ್ಲಿಸದ  ಶಾಸಕರು,ವಿಧಾನ ಪರಿಷತ್ ಸದಸ್ಯರ ಹೆಸರನ್ನ  ಲೋಕಾಯುಕ್ತ  ಬಹಿರಂಗಪಡಿಸಿದೆ.

ಆಸ್ತಿ ವಿವರ ಸಲ್ಲಿಸದ ಕರ್ನಾಟಕದ ಶಾಸಕರು ಹಾಗೂ ವಿಧಾನಪರಿಷತ್ ಸದಸ್ಯರ ಪಟ್ಟಿಯನ್ನು ಲೋಕಾಯುಕ್ತ ಪ್ರಕಟಿಸಿದೆ. ಆಯ್ಕೆಯಾದ ಮೂರು ತಿಂಗಳೊಳಗೆ ಸದಸ್ಯರು ತಮ್ಮ ಆಸ್ತಿ ವಿವರನ್ನು ಲೋಕಾಯುಕ್ತಕ್ಕೆ ಸಲ್ಲಿಸಬೇಕೆಂಬ ನಿಯಮ ಇದೆ. ಆದರೆ, ಶಾಸಕರು ಹಾಗೂ ಪರಿಷತ್ ಸದಸ್ಯರು ಇದುವರೆಗೂ ಲೋಕಾಯುಕ್ತ ಕಚೇರಿಗೆ ಆಸ್ತಿ ವಿವರವನ್ನು ಸಲ್ಲಿಸಿಲ್ಲ. ಇದೀಗ ಅಂತಿಮವಾಗಿ ಲೋಕಾಯುಕ್ತ, ಆಸ್ತಿ ವಿವರ ಸಲ್ಲಿಸದ ಶಾಸಕರುಗಳ ಹೆಸರುಗಳ ಪಟ್ಟಿಯನ್ನು ಸಾರ್ವಜನಿಕ ಪ್ರಕಟಣೆ ಹೊರಡಿಸಿದೆ.

ಕಳೆದ ಬಾರಿ ಸಚಿವರಾಗಿದ್ದ ಶ್ರೀರಾಮುಲು, ಕೆಸಿ ನಾರಾಯಣಗೌಡ, ಎಸ್ ಅಂಗಾರ ಆಸ್ತಿ ವಿವರ ಸಲ್ಲಿಸದೇ ನಿಮಯ ಉಲ್ಲಂಘಿಸಿದ್ದರು. ಈ ಬಾರಿ ರಹೀಂ ಖಾನ್, ಕೆ ಎನ್ ರಾಜಣ್ಣ, ಜಮೀರ್ ಅಹಮದ್ ಖಾನ್, ರಾಮಲಿಂಗ ರೆಡ್ಡಿ, ಕೆ ಎಚ್ ಮುನಿಯಪ್ಪ ಅವರು ಸಹ ಆಸ್ತಿ ವಿವರ ಸಲ್ಲಿಸಿಲ್ಲ. ಹೀಗೆ ಕಳೆದ ವಿಧಾನಸಭೆ ಅವಧಿಯ 81 ಮಂದಿ ಶಾಸಕರಿಂದ ಆಸ್ತಿ ವಿವರ ಸಲ್ಲಿಸದೇ ಲೋಪ ಎಸಗಿದ್ದಾರೆ.

ಈ ಬಾರಿ ಅಂದರೆ 2023ರಲ್ಲಿ ನಡೆದ ಕರ್ನಾಟಕ ವಿಧಾನಸಭೆ ಅವಧಿಯ 51 ಮಂದಿ ಶಾಸಕರ ಆಸ್ತಿ ವಿವರ ಸಲ್ಲಿಕೆ ಆಗಿಲ್ಲ. ಹಾಗೇ 21 ವಿಧಾನ ಪರಿಷತ್ ಸದಸ್ಯರು ಸಹ ಆಸ್ತಿ ವಿವರ ಸಲ್ಲಿಕೆ ಮಾಡಿಲ್ಲ. ಇನ್ನುಸಚಿವ ಮಧು ಬಂಗಾರಪ್ಪ ಹಾಗೂ ಮಾಜಿ ಸಚಿವ ಮುರಿಗೇಶ್ ನಿರಾಣಿ ಸೇರಿದಂತೆ ಹಲವು ಗಡುವು ಮುಗಿದ ಅಂದರೆ ಜೂನ್ 30 ರ ಬಳಿಕ ಆಸ್ತಿ ವಿವರ ಸಲ್ಲಿಕೆ ಮಾಡಿದ್ದಾರೆ. ಅವಧಿ ಮುಗಿದ ಬಳಿಕ 10 ಶಾಸಕರು, ಓರ್ವ ವಿಧಾನ ಪರಿಷತ್ ಸದಸ್ಯ ಆಸ್ತಿ ವಿವರ ನೀಡಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

ಎಲ್ಲಾ 224 ಶಾಸಕರಿಗೂ ಆಸ್ತಿ ವಿವರ ಸಲ್ಲಿಸುವಂತೆ ಲೋಕಾಯುಕ್ತ ನ್ಯಾಯಮೂರ್ತಿ ಅವರು ಜೂನ್ 30 ಡೆಡ್ಲೈನ್ ನೀಡಿದ್ದರು. ಲೋಕಾಯುಕ್ತ ನ್ಯಾ.ಬಿ.ಎಸ್.ಪಾಟೀಲ್ ಅವರು ಎಲ್ಲಾ ಪಕ್ಷದ ಶಾಸಕರ ಆಸ್ತಿ ವಿವರ ಪಡೆದು ಸಲ್ಲಿಸುವಂತೆ ಸರ್ಕಾರದ ಮುಖ್ಯಕಾರ್ಯದರ್ಶಿ ವಂದಿತಾ ಶರ್ಮಾ ಅವರಿಗೆ ಮೌಖಿಕ ಸೂಚನೆ ನೀಡಿದ್ದರು.

ಕಳೆದ ಬಾರಿ ಆಸ್ತಿ ವಿವರ ಸಲ್ಲಿಸಿದ್ದೇವೆಂದು ಸುಮ್ಮನಿರುವಂತಿಲ್ಲ. ಪುನರ್ ಆಯ್ಕೆಯಾದ ಶಾಸಕರು ಮತ್ತೊಮ್ಮೆ ಆಸ್ತಿ ವಿವರ ಸಲ್ಲಿಸಬೇಕು. ಮೊದಲ ಬಾರಿ ಆಯ್ಕೆಯಾದ ಶಾಸಕರು ಕೂಡ ಆಸ್ತಿ ವಿವರ ಸಲ್ಲಿಸಬೇಕು. ಒಂದು ವೇಳೆ ಜೂ.30ರೊಳಗೆ ಶಾಸಕರು ತಮ್ಮ ಆಸ್ತಿ ವಿವರ ಸಲ್ಲಿಸದಿದ್ದರೆ ಶಿಸ್ತು ಕ್ರಮಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದರು. ಅಲ್ಲದೇ ಸೆಪ್ಟಂಬರ್ 1ಕ್ಕೆ ನೊಟೀಸ್ ಸಹ ಜಾರಿ ಮಾಡಲಾಗಿತ್ತು.

ಕರ್ನಾಟಕ ಲೋಕಾಯುಕ್ತ ಕಾಯಿದೆ 1984ರ ಕಲಂ 22(1), ಕಲಂ 7ರ ಉಪಕಲಂ (1)ರಂತೆ ಸರಕಾರಿ ನೌಕರನಲ್ಲದ ಪ್ರತಿಯೊಬ್ಬ ಸಾರ್ವಜನಿಕರ ನೌಕರ ಈ ಕಾಯಿದೆಯಂತೆ, ಈ ಅಧಿನಿಯಮ ಜಾರಿಗೆ ಬಂದ ಮೂರು ತಿಂಗಳೊಳಗೆ ಮತ್ತು ಜೂನ್ಗಿಂತ ಮುಂಚಿತವಾಗಿ ಪ್ರತಿ ವರ್ಷವೂ ಪ್ರತಿ ವರ್ಷ ತನ್ನ ಮತ್ತು ಕುಟುಂಬದ ಸದಸ್ಯರ ಆಸ್ತಿ ವಿವರಗಳನ್ನು ನಿಗದಿತ ನಮೂನೆಯಲ್ಲಿ ಲೋಕಾಯುಕ್ತರಿಗೆ ಸಲ್ಲಿಸಬೇಕೆಂಬ ನಿಯಮವಿದೆ. ಅದು ಕಡ್ಡಾಯ ಕೂಡ.

ಒಂದು ವೇಳೆ ಆಸ್ತಿ ವಿವರ ಸಲ್ಲಿಸದಿದ್ದಲ್ಲಿ ಸಾರ್ವಜನಿಕ ಸೇವಕರಿಗೆ ಸಂಬಂಧಿಸಿದಂತೆ ಲೋಕಾಯುಕ್ತ ಸಕ್ಷಮ ಪ್ರಾಧಿಕಾರ (ರಾಜ್ಯಪಾಲರು) ವರದಿ ಸಲ್ಲಿಸಬೇಕು. ಅಂತಹ ಶಾಸಕರ ಹೆಸರುಗಳನ್ನು ರಾಜ್ಯದಾದ್ಯಂತ ಪ್ರಸರಣ ಹೊಂದಿರುವ ಮೂರು ದಿನಪತ್ರಿಕೆಗಳಲ್ಲಿ ಪ್ರಕಟಿಸಲು ಕಾಯ್ದೆಯಲ್ಲಿ ಅವಕಾಶವಿದೆ.

 

Related posts

ನನ್ನ ಮಣ್ಣು, ನನ್ನ ದೇಶ” ಅಭಿಯಾನಕ್ಕೆ ಚಾಲನೆ

ತಮಿಳುನಾಡಿಗೆ ಕಾವೇರಿ ನದಿ ನೀರು ಬಿಡದಂತೆ ಆಗ್ರಹ: ರಸ್ತೆ ತಡೆದು ಪ್ರತಿಭಟನೆ.

ಆತ್ಮವಿಶ್ವಾಸದಿಂದ ಜೀವನದಲ್ಲಿ ಯಶಸ್ಸು ನಿಶ್ಚಿತ-ಕಿರಣ್ ಎ ವಸಂತ್