ಶಿವಮೊಗ್ಗ: ಶಿವಮೊಗ್ಗ ದಸರಾ 2023ರ ಪರಿಸರ ದಸರಾ ಅಂಗವಾಗಿ ಅ.22ರಂದು ಕುವೆಂಪು ರಂಗಮಂದಿರದಲ್ಲಿ ಬೆಳಿಗ್ಗೆ 11 ಗಂಟೆಗೆ ಜಲ ಸಂರಕ್ಷಣೆ ಕುರಿತು ಸಾರ್ವಜನಿಕರೊಂದಿಗೆ ಸಂವಾದ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಸಮಿತಿ ಅಧ್ಯಕ್ಷೆ ಯಮುನಾ ರಂಗೇಗೌಡ ಹೇಳಿದರು.
ಅವರು ಇಂದು ಮಹಾನಗರ ಪಾಲಿಕೆ ಆವರಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಪರಿಸರ ದಸರಾ ಅಂಗವಾಗಿ ಈಗಾಗಲೇ ಸೈಕಲ್ ಜಾಥಾ ಮತ್ತು ಪರಿಸರ ಕುರಿತ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮಗಳು ಯಶಸ್ವಿಯಾಗಿ ನಡೆದಿವೆ. ಇದರ ಮುಂದುವರಿದ ಭಾಗವಾಗಿ ಅ.22ರಂದು ಸಂವಾದ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದರು.
ಮಳೆ ಇಲ್ಲದೆ ತುಂಬಾ ತೊಂದರೆಯಾಗಿದೆ. ಮುಂಬರುವ ಬೇಸಿಗೆ ದಿನಗಳಲ್ಲಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕುಡಿಯುವ ಹಾಗೂ ದಿನಬಳಕೆಗೆ ಉಪಯೋಗಿಸುವ ನೀರಿನ ಕೊರತೆ ಉಂಟಾಗದಂತೆ ಮುಂಜಾಗ್ರತಾ ಕ್ರಮ ವಹಿಸಬೇಕಾದುದು ನಮ್ಮ ಜವಾಬ್ದಾರಿಯಾಗಿದೆ. ಸಾರ್ವಜನಿಕರಿಗೆ ನೀರಿನ ಬಳಕೆಯ ಬಗ್ಗೆ ಜಾಗೃತಿ ಮೂಡಿಸಬೇಕಾಗಿದೆ. ಸಾರ್ವಜನಿಕರು ನೀರನ್ನು ಯಥೇಚ್ಚವಾಗಿ ಉಪಯೋಗಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಈ ¸ಂವಾದ ಕಾರ್ಯಕ್ರಮ ಸಾಕಷ್ಟು ಉಪಯುಕ್ತವಾಗುತ್ತದೆ ಎಂದರು.
ಮಹಾನಗರ ಪಾಲಿಕೆ ಆಯುಕ್ತ ಕೆ. ಮಾಯಣ್ಣ ಗೌಡ ಸಂವಾದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಸಾರ್ವಜನಿಕರ ಪ್ರಶ್ನೆಗಳಿಗೆ ಸಂವಾದದ ಮೂಲಕ ಉತ್ತರಿಸುತ್ತಾರೆ. ಈ ಕಾರ್ಯಕ್ರಮದಲ್ಲಿ ಕಾಲೇಜು ವಿದ್ಯಾರ್ಥಿಗಳು, ನಗರದ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಮತ್ತು ಸಾರ್ವಜನಿಕರು ಭಾಗವಹಿಸಲಿದ್ದಾರೆ ಎಂದರು.
ಪತ್ರಿಕಾ ಗೋಷ್ಠಿಯಲ್ಲಿ ಶಾಸಕ ಎಸ್.ಎನ್. ಚನ್ನಬಸಪ್ಪ, ಮೇಯರ್ ಎಸ್. ಶಿವಕುಮಾರ್, ಉಪಮೇಯರ್ ಲಕ್ಷ್ಮಿ ಶಂಕರ ನಾಯಕ್, ಸದಸ್ಯರಾದ ಹೆಚ್.ಸಿ. ಯೋಗೇಶ್, ಸುರೇಖಾ ಮುರುಳೀಧರ್, ಸುವರ್ಣಾ ಶಂಕರ್ ಇದ್ದರು.