ಕನ್ನಡಿಗರ ಪ್ರಜಾನುಡಿ
ಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ಪ್ರಾಥಮಿಕ, ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ `ಶೈಕ್ಷಣಿಕ ಪ್ರವಾಸ’ : ಹಲವು ಷರತ್ತುಗಳನ್ನು ವಿಧಿಸಿದ ಶಿಕ್ಷಣ ಇಲಾಖೆ

ಬೆಂಗಳೂರು : ರಾಜ್ಯದ ಪ್ರಾಥಮಿಕ ಮತ್ತು ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ 2022-23 ನೇ ಸಾಲಿನ ಶೈಕ್ಷಣಿಕ ಪ್ರವಾಸ ಕೈಗೊಳ್ಳಲು ಹಲವು ಷರತ್ತುಗಳನ್ನ ವಿಧಿಸಿ  ರಾಜ್ಯ ಸರ್ಕಾರವು ಸುತ್ತೋಲೆ ಹೊರಡಿಸಿದೆ.

ರಾಜ್ಯದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪ್ರವಾಸ ಕೈಗೊಳ್ಳಲು ಅನುಮತಿ ನೀಡುವ ಬಗ್ಗೆ ಈಗಾಗಲೇ ಸುತ್ತೋಲೆ ಹೊರಡಿಸಲಾಗಿದೆ. ಅಲ್ಲದೇ ಅದರಲ್ಲಿಯೂ ಷರತ್ತುಗಳನ್ನು ಉಲ್ಲೇಖಿಸಲಾಗಿದೆ.

ಈ ಹಿಂದಿನ ಸುತ್ತೋಲೆಯಲ್ಲಿ ಕೋವಿಡ್-19 ಸಾಂಕ್ರಾಮಿಕ ರೋಗ ಹರಡುವಿಕೆಯಿಂದ ದೇಶಾದ್ಯಂತ ಗಂಭೀರ ಪರಿಸ್ಥಿತಿ ಉಂಟಾಗಿದ್ದ ಪ್ರಯುಕ್ತ ಯಾವುದೇ ಶೈಕ್ಷಣಿಕ ಪ್ರವಾಸ ಹಮ್ಮಿಕೊಳ್ಳಬಾರದೆಂದು ಸೂಚಿಸಿಲಾಗಿರುತ್ತದೆ. ಆದರೆ 2022-23ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ರಾಜ್ಯದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪ್ರವಾಸ ಕೈಗೊಳ್ಳಲು ಮಾರ್ಗದರ್ಶನ ಮತ್ತು ಅನುಮತಿ ನೀಡಲು ಕೋರಿರುತ್ತಾರೆ. ಅದರಂತೆ ಷರತ್ತುಗಳ ಅನ್ವಯ ಕ್ಷೇತ್ರ ಶಿಕ್ಷಣಾಧಿಕಾರಿಗಳು ಮನವಿಗಳನ್ನು ಪರಿಶೀಲಿಸಿ ಅನುಮತಿ ನೀಡಲು ಸೂಚಿಸಲಾಗಿದೆ.

ಈ ಕುರಿತು ಸುತ್ತೋಲೆ ಹೊರಡಿಸಿರುವ ಸರ್ಕಾರ, ಉಪನಿರ್ದೇಶಕರು(ಆಡಳಿತ), ಶಾಲಾ ಶಿಕ್ಷಣ ಇಲಾಖೆ, ಬೆಂಗಳೂರು ಉತ್ತರ ಜಿಲ್ಲೆ ಇವರು ಕೆಲವು ಶಾಲೆಯವರು ಹೊರ ರಾಜ್ಯಕ್ಕೆ ಶೈಕ್ಷಣಿಕ ಪ್ರವಾಸ ಕೈಗೊಳ್ಳಲು ಮನವಿ ಸಲ್ಲಿಸಿರುತ್ತಾರೆ.   ಆದರೆ ದಿನಾಂಕ:14/11/2022ರ ಸುತ್ತೋಲೆಯಲ್ಲಿ ಹೊರ ರಾಜ್ಯಕ್ಕೆ ಪ್ರವಾಸ ಕೈಗೊಳ್ಳಲು ಅನುಮತಿ ನೀಡುವ ಕುರಿತು ಯಾವುದೇ ನಿರ್ದೇಶನವಿರುವುದಿಲ್ಲ, ಆದ್ದರಿಂದ ಈ ಬಗ್ಗೆ ಅನುಮತಿ ನೀಡುವ ಕುರಿತು ಮಾರ್ಗದರ್ಶನ ಕೋರಿರುತ್ತಾರೆ.

ಅದರಂತೆ ಪರಿಶೀಲಿಸಲಾಗಿ, ಪ್ರತೀ ಶೈಕ್ಷಣಿಕ ವರ್ಷ ರಾಜ್ಯದ ಪ್ರಾಥಮಿಕ ಮತ್ತು ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ದೇಶದಾದ್ಯಂತ ಶೈಕ್ಷಣಿಕ ಪ್ರವಾಸ ಕೈಗೊಳ್ಳಲು ಉಲ್ಲೇಖ (1) ರ ಸುತ್ತೋಲೆಯಲ್ಲಿನ ಷರತ್ತುಗಳ ಅನ್ವಯ ಆಯಾ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಅನುಮತಿ ನೀಡಲು ಸೂಚಿಸಿದ ಹಾಗೂ ಉಲ್ಲೇಖಿತ ಸುತ್ತೋಲೆಯ ಷರತ್ತು 8ರ ಜೊತೆಗೆ ಸದರಿ ಶೈಕ್ಷಣಿಕ ಪ್ರವಾಸವನ್ನು ಭಾರತೀಯ ರೈಲ್ವೇಯ ರೈಲುಗಳಲ್ಲಿಯೂ ಹಮ್ಮಿಕೊಳ್ಳಬಹುದು ಎಂದು ತಿಳಿಸಿದೆ. ಉಳಿದಂತೆ ಉಲ್ಲೇಖ (1) ರ ಸುತ್ತೋಲೆಯಲ್ಲಿನ ಅಂಶಗಳು ಯಥಾವತ್ತಾಗಿ ಮುಂದುವರೆಯುತ್ತವೆ ಎಂದು ತಿಳಿಸಿದೆ.

ಷರತ್ತುಗಳು…

* ಪ್ರತಿ ವರ್ಷ ಡಿಸೆಂಬರ್ ಮಾಹೆಯ ಅಂತ್ಯದೊಳಗೆ ಶೈಕ್ಷಣಿಕ ಪ್ರವಾಸ ಕೈಗೊಳ್ಳಬೇಕು. ಯಾವುದೇ ಕಾರಣಕ್ಕೂ ಡಿಸೆಂಬರ್ ಮಾಹೆಯ ನಂತರ ಶೈಕ್ಷಣಿಕ ಪ್ರವಾಸ ಕೈಗೊಳ್ಳದೇ ಶೈಕ್ಷಣಿಕ ಚಟುವಟಿಕೆಗಳಿಗೆ ಪ್ರಾಧಾನ್ಯತೆ ನೀಡುವುದು.

* ಪೋಷಕರ ಒಪ್ಪಿಗೆ ಪಡೆದ ವಿದ್ಯಾರ್ಥಿಗಳನ್ನು ಮಾತ್ರ ಶೈಕ್ಷಣಿಕ ಪ್ರವಾಸಕ್ಕೆ ಕರೆದೊಯ್ಯುವುದು.

* ಪ್ರವಾಸ ಶೈಕ್ಷಣಿಕ ಪ್ರವಾಸವಾಗಿರಲು ವಿದ್ಯಾರ್ಥಿಗಳಿಗೆ ಕಲಿಕೆಗೆ ಪೂರಕವಾಗುವ ಸ್ಥಳಗಳನ್ನು ಪ್ರವಾಸಕ್ಕೆ ಆಯ್ಕೆ ಮಾಡಿಕೊಳ್ಳುವುದು.

* ಪ್ರವಾಸ ಕೈಗೊಳ್ಳುವ ಖಾಸಗಿ ಶಾಲೆಗಳು ಪ್ರಸ್ತುತ ಶೈಕ್ಷಣಿಕ ವರ್ಷದಲ್ಲಿ ಕಡ್ಡಾಯವಾಗಿ ಶಾಲಾ ಮಾನ್ಯತೆಯನ್ನು ನವೀಕರಿಸಿರಬೇಕು.

* ಶೈಕ್ಷಣಿಕ ಪ್ರವಾಸವನ್ನು ಶಾಲಾ ದಿನಗಳಂದು ಕೈಗೊಂಡಲ್ಲಿ ಮುಂದಿನ ದಿನಗಳಲ್ಲಿ ಅಂದರೆ ಶನಿವಾರ ಪೂರ್ಣದಿನ/ ಭಾನುವಾರ ಶಾಲೆ ನಡೆಸಿ ಕೊರತೆ ಬೀಳುವ ಪಠ್ಯ ಚಟುವಟಿಕೆಗಳನ್ನು ಸರಿದೂಗಿಸುವುದು.

* ಇಲಾಖೆಯಿಂದ ಪ್ರವಾಸಕ್ಕೆ ಯಾವುದೇ ಸೌಲಭ್ಯವನ್ನು ನೀಡಲಾಗುವುದಿಲ್ಲ.

* ಪ್ರವಾಸದ ಸಮಯದಲ್ಲಿ ಸಂಭವಿಸುವ ಯಾವುದೇ ಅವಘಡಗಳಿಗೆ ಶಾಲೆಯ ಮುಖ್ಯಸ್ಥರೇ ನೇರ ಹೂಣೆಗಾರರಾಗಿರುತ್ತಾರೆ. ಇಲಾಖೆಯು ಜವಾಬ್ದಾರಿಯಾಗಿರುವುದಿಲ್ಲ.

* ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಅಥವಾ ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಇಲಾಖಾ ವಾಹನಗಳಲ್ಲೇ ಕಡ್ಡಾಯವಾಗಿ ಶೈಕ್ಷಣಿಕ ಪ್ರವಾಸವನ್ನು ಕೈಗೊಳ್ಳಬೇಕು.

* ಯಾವುದೇ ಕಾರಣಕ್ಕೂ ಅನಧೀಕೃತವಾಗಿ ಖಾಸಗಿ ಹಾಗೂ ಮಿನಿ ಬಸ್ಗಳಲ್ಲಿ ಪ್ರವಾಸವನ್ನು ಕೈಗೊಳ್ಳಬಾರದು.

* ಮಕ್ಕಳ ಆರೋಗ್ಯ ಮತ್ತು ಸುರಕ್ಷತೆಗೆ ಹೆಚ್ಚು ಆದ್ಯತೆ ನೀಡುವುದು ಹಾಗೂ ಕೋವಿಡ್ 19ಗೆ ಸಂಬಂಧಿಸಿದಂತೆ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿಬೇಕು.

* ಪ್ರವಾಸ ಕೈಗೊಂಡಿರುವ ವಿದ್ಯಾರ್ಥಿನಿಯರ ಮೇಲ್ವಿಚಾರಣೆಯನ್ನು ಪ್ರವಾಸಕ್ಕೆ ನಿಯೋಜಿತ ಮಹಿಳಾ ಶಿಕ್ಷಕರೇ ಕಡ್ಡಾಯವಾಗಿ ನೋಡಿಕೊಳ್ಳತಕ್ಕದ್ದು.

 

Related posts

ಗೃಹಲಕ್ಷ್ಮಿ ಯೋಜನೆಯ ಮೊದಲ ಕಂತಿನ ಹಣ ಬಿಡುಗಡೆ 

ದೇಶದ ಜನತೆಗೆ ಶಾಕ್: ಡಾರ್ಕ್ ವೆಬ್ ನಲ್ಲಿ 81.5 ಕೋಟಿ ‘ಆಧಾರ್ ಕಾರ್ಡ್’ ಬಳಕೆದಾರರ ಡೇಟಾ ಸೋರಿಕೆ.

ಡಿಸಿಎಂ ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ಭದ್ರಾ ಕಾಡಾ ಸಭೆ: ಸಚಿವ ಮಧುಬಂಗಾರಪ್ಪ ಭಾಗಿ